ಪ್ರಧಾನಿ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಸಚಿವ ಸೋಮಣ್ಣ ನೇತೃತ್ವದಲ್ಲಿ ವಿವಿಧ ಸೇವಾ ಕಾರ್ಯಕ್ರಮ

 

 

 

ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರು ಈ ದೇಶದ ಸಂಪತ್ತು ಅವರ ಆಡಳಿತದಲ್ಲಿ ದೇಶ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಮೋದಿಯವರ ಅಭಿವೃದ್ಧಿ ಚಿಂತನೆಗಳು, ದೂರದೃಷ್ಟಿತ್ವ ರಾಷ್ಟ್ರದ ಪ್ರಗತಿಗೆ ಪೂರಕವಾಗಿವೆ. ಅವರ ಹುಟ್ಟು ಹಬ್ಬವನ್ನು ದೇಶದ ಹಬ್ಬವಾಗಿ ಆಚರಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

 

 

 

 

 

 

ಪ್ರಧಾನಿ ನರೇಂದ್ರ ಮೋದಿಯವರ ೭೪ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಬಿಜೆಪಿಯಿಂದ ಮಂಗಳವಾರ ಸಂಸದರ ಕಾರ್ಯಾಲಯದಲ್ಲಿ ಏರ್ಪಾಟಾಗಿದ್ದ ವಿವಿಧ ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಚಿವ ವಿ.ಸೋಮಣ್ಣ, ಮೋದಿಯವರು ಈ ದೇಶಕ್ಕೆ ನೀಡಿದ ಕೊಡುಗೆ, ದೇಶದ ಅಭಿವೃದ್ಧಿಗೆ ಅವರ ಚಿಂತನೆಗಳು, ದೂರದೃಷ್ಟಿ ನೋಟವನ್ನು ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಉದ್ದೇಶದಿಂದ ಮೋದಿಯವರು ನಡೆದು ಬಂದ ದಾರಿ ಕುರಿತ ಪುಸ್ತಕವನ್ನು ಕನ್ನಡದಲ್ಲಿ ಹೊರತರಲು ಉದ್ದೇಶಿಸಲಾಗಿದೆ. ಈ ಸಂಬಂಧ ಹಿರಿಯ ಸಾಹಿತಿಗಳೊಂದಿಗೆ ಚರ್ಚಿಸಿದ್ದೇನೆ, ನೀವು ಕಂಡಂತೆ ಮೋದಿಯವರ ಆದರ್ಶ ಕುರಿತು ಲೇಖನಗಳನ್ನು ನೀವೂ ಬರೆಯಬಹುದು, ೩-೪ ತಿಂಗಳಲ್ಲಿ ಪುಸ್ತಕ ಸಿದ್ಧಪಡಿಸಿ ಲೋಕಾರ್ಪಣೆ ಮಾಡಲಾಗುವುದು ಎಂದರು.

 

 

 

 

 

 

ಗಾಂಧಿ ಸಂದೇಶ ಸಾಕ್ಷಾತ್ಕಾರ
ಗಾಂಧೀಜಿಯವರ ಸ್ವಚ್ಛತಾ ಆಂದೋಲನ 2014ರವರೆಗೆ ಸಮರ್ಪಕವಾಗಿ ಅನುಷ್ಠಾನಗೊಂಡಿರಲಿಲ್ಲ, ಮೋದಿಯವರು ಪ್ರಧಾನಿಯಾದ ನಂತರ ತಮ್ಮ ಕಾರ್ಯಕ್ರಮಗಳ ಮೂಲಕ ಗಾಂಧೀಜಿಯ ಸ್ವಚ್ಛತಾ ಸಂದೇಶವನ್ನು ಸಾಕಾರಗೊಳಿಸುತ್ತಿದ್ದಾರೆ. ಸ್ವಚ್ಛತಾ ಆಂದೋಲನಾ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸುಮಾರು ೮ ಲಕ್ಷ ಕೋಟಿಗೂ ಹೆಚ್ಚು ಹಣ ನೀಡಿದೆ. ಕೇಂದ್ರ ಸರ್ಕಾರ ಇದೂವರೆಗೆ ಯಾವುದೇ ಅಭಿವೃದ್ಧಿ ಯೋಜನೆಗೆ ಹಣ ನೀಡಿಲ್ಲ ಎನ್ನುವ ಉದಾಹರಣೆ ಇಲ್ಲ ಎಂದು ಹೇಳಿದರು.

 

 

 

 

 

ಐದು ಪಂಚಾಯ್ತಿ ದತ್ತು ಸ್ವೀಕಾರ
ದಶದ ಪ್ರತಿಯೊಬ್ಬರಿಗೂ ಮೂಲಭೂತ ಅವಶ್ಯಕತೆಗಳನ್ನು ಕೊಡುವುದು ಸರ್ಕಾರದ ಕರ್ತವ್ಯ ಎಂದು ನಂಬಿರುವ ಮೋದಿಯರು ಈ ದೇಶದ ಅಭಿವೃದ್ಧಿ ಹರಿಕಾರ. ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ, ಅಂಗನವಾಡಿ, ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲು ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ. ಇದೇ ಪ್ರೇರಣೆಯಿಂದ ತಾವು ತುಮಕೂರು ನಗರ ಸುತ್ತಲಿನ ಐದು ಗ್ರಾಮ ಪಂಚಾಯ್ತಿಗಳನ್ನು ದತ್ತು ಪಡೆದಿದ್ದು, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಬೆಳಗುಂಬ, ಸ್ವಾಂದೇನಹಳ್ಳಿ, ಗೂಳೂರು, ಹೆಗ್ಗೆರೆ, ಹೆತ್ತೇನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ದತ್ತು ಪಡೆದಿರುವುದಾಗಿ ಸಚಿವ ವಿ.ಸೋಮಣ್ಣ ಪ್ರಕಟಿಸಿದರು.

 

 

 

 


ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ೨೦೧೪ರಲ್ಲಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ದೇಶದ ಸುಭದ್ರತೆಗೆ ಎಚ್ಚರವಹಿಸಿ ೧೪೦ ಕೊಟಿ ಜನರ ಭದ್ರತೆ ಮೂಡಿಸಿ ವಿಶ್ವದಲ್ಲೇ ಅಗ್ರ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಇಂತಹ ಮಹಾನ್ ನಾಯಕರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದಲ್ಲಿ ಸ್ವಚ್ಛತೆ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣೆ ಸೇರಿ ವಿವಿಧ ಸೇವಾ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

 

 

 

 

ಸಚಿವ ಸೋಮಣ್ಣನವರ ನೇತೃತ್ವದಲ್ಲಿ ಈ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲಾಗಿದೆ. ಮೋದಿಯವರ ಆಯುಷು ಮನ್ನಷ್ಟು ಗಟ್ಟಿಯಾಗಬೇಕು, ದೇಶವನ್ನು ಗಟ್ಟಿ ಮಾಡುವಲ್ಲಿ ಅವರು ಸಫಲರಾಗಿದ್ದಾರೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಸಾರಿ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ತಿಳಿಸಿದರು. ನಗರ ಪಾಲಿಕೆ ಆಯುಕ್ತೆ ಬಿ.ವಿಅಶ್ವಿಜ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನವಾದ ಇಂದಿನಿಂದ ಅಕ್ಟೋಬರ್ ೨ರ ಗಾಂಧಿ ಜಯಂತಿವರೆಗೆ ನಗರದಲ್ಲಿ ಸ್ವಚ್ಛತಾ ಅಭಿಯಾನ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಲಾಗುತ್ತಿದೆ. ನಗರದಲ್ಲಿ ರಾತ್ರಿ ವೇಳೆ ಪಾಲಿಕೆ ಸಿಬ್ಬಂದಿ ಗಸ್ತು ಮಾಡಿ ಖಾಲಿ ಜಾಗಗಳಲ್ಲಿ ಕಸ ಸುರಿಯುವವರನ್ನು ಪತ್ತೆ ಮಾಡಿ ದಂಡ ವಿಧಿಸಲಿದ್ದಾರೆ. ವಾಣಿಜ್ಯ ಪ್ರದೇಶಗಳಲ್ಲಿ ಸಂಜೆ ವೇಳೆ ಕಸ ಸಂಗ್ರಹಿಸುವ ಕಾರ್ಯಕ್ರಮ ಆರಂಭಿಸಲಾಗಿದೆ. ಸೋಮವಾರ ರಸ್ತೆ ಮೀಡಿಯನ್‌ಗಳು, ಬುಧವಾರ ಪಾರ್ಕ್‌ಗಳನ್ನು ಸ್ವಚ್ಛಗೊಳಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

 

 

 

 

 

ಇದಕ್ಕೂ ಮೊದಲು ಬೆಳಗುಂಬದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಮ್ಮುಖದಲ್ಲಿ ಶಾಸಕ ಬಿ.ಸುರೇಶ್‌ಗೌಡರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇವರೊಂದಿಗೆ ಶಾಸಕ ಜಿ.ಬಿ.ಜ್ಯೋತಿಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜು, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮತ್ತಿತರ ಮುಖಂಡರು ಭಾಗವಹಿಸಿದ್ದರು.
ಇದೇ ವೇಳೆ ನಗರದ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸಚಿವ ಸೋಮಣ್ಣನವರ ಅಧ್ಯಕ್ಷತೆಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ೭೪ ಗಿಡ ನೆಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಮುಖಂಡರಾದ ಎಸ್.ಪಿ.ಚಿದಾನಂದ್, ಎಸ್.ಶಿವಪ್ರಸಾದ್, ಡಾ.ಪರಮೇಶ್ ಮೊದಲಾದವರು ಭಾಗವಹಿಸಿದ್ದರು.

 

 

 

 

 

 

ಕೇಂದ್ರ ಸಚಿವ ವಿ.ಸೋಮಣ್ಣ ಅವರ ಕಾರ್ಯಾಲಯ ಆವರಣದಲ್ಲಿ ಮೋದಿಯವರ ಜನ್ಮದಿನಾಚರಣೆ ಪ್ರಯುಕ್ತ ಸಿದ್ಧಗಂಗಾ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ನೇತ್ರ ತಪಾಸಣೆ, ಉಚಿತವಾಗಿ ಕನ್ನಡಕ ವಿತರಣೆ ಕಾರ್ಯಕ್ರಮ ವ್ಯವಸ್ಥೆಯಾಗಿತ್ತು. ಇದೇ ಸಂದರ್ಭದಲ್ಲಿ ನಗರಪಾಲಿಕೆ ಇ ಟಾಯ್ಲೆಟ್ ಅನ್ನು ಸಚಿವ ಸೋಮಣ್ಣ ಲೋಕಾರ್ಪಣೆ ಮಾಡಿದರು. ಹಸಿ ಕಸ, ಒಣ ಕಸ ಬೇರ್ಪಡಿಸಿ ನೀಡಲು ಪಾಲಿಕೆಯಿಂದ ನಾಗರೀಕರಿಗೆ ಡಸ್ಟ್ ಬಿನ್ ವಿತರಿಸಿದರು.

Leave a Reply

Your email address will not be published. Required fields are marked *

error: Content is protected !!