ತುಮಕೂರು : ಜಿಲ್ಲೆಯ ಗುಬ್ಬಿ ತಾಲ್ಲೂಕು ಡಿ.ರಾಂಪುರ ಬಳಿಯ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ನಡೆಯುವುದನ್ನು ವಿರೋಧಿಸಿ ಹೋರಾಟಕ್ಕೆ ಮುನ್ನುಡಿ ಬರೆದಿರುವ ಮಾಜಿ ಸಚಿವ ಸೊಗಡು ಶಿವಣ್ಣ, ಮಠಾಧೀಶರು ಹಾಗೂ ರೈತರ ಮೇಲೆ ಸುಳ್ಳು ಕೇಸು ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಕಾಮಗಾರಿ ಸ್ಥಗಿತವಾಗುವವರೆಗೂ ಉಪವಾಸ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಹೋರಾಟಕ್ಕೆ ಮುನ್ನುಡಿ ಬರೆದಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಯೋಜನೆ ಆರಂಭವಾದಾಗಿನಿಂದ ಸ್ಥಳೀಯ ರೈತರಿಗೆ ಬೆನ್ನೆಲುಬಾಗಿ ನಿಂತು ಪ್ರಭಲ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಪೈಪ್ ಹೊತ್ತು ತರುವ ಲಾರಿಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದರು, ಇದಕ್ಕೆ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಶಾಸಕರುಗಳಾದ ಬಿ.ಸುರೇಶ್ ಗೌಡ, ಜ್ಯೋತಿಗಣೇಶ್, ಗುಬ್ಬಿ ಬಿಜೆಪಿ ಮುಖಂಡ ದಿಲೀಪ್ , ಮಾಜಿ ಶಾಸಕ ಮಸಾಲೆ ಜಯರಾಂ ಸೇರಿದಂತೆ ಸಾವಿರಾರು ಮಂದಿ ರೈತ ಮುಖಂಡರು, ಮತ್ತು ಜನತೆ ಹೋರಾಟಕ್ಕೆ ಸಾಥ್ ನೀಡಿದ್ದರು.
ಇದೀಗ ಹೋರಾಟದ ಮುಂದಿನ ಭಾಗವಾಗಿ ಮಾಜಿ ಸಚಿವ ಸೊಗಡು ಶಿವಣ್ಣ ಅಮರಣಾಂತ ಉಪವಾಸ ಕೈಗೊಂಡಿದ್ದು, ಗಾಂಧೀಜಿ ಉಪವಾಸ ಸತ್ಯಾಗ್ರಹ ಮಾಡಿ ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟಿದ್ದಾರೆ, ನಾನು ಅವರ ಹಾದಿ ಹಿಡಿದಿದ್ದೇನೆ.
ಇಲ್ಲಿನ ಜಿಲ್ಲಾಧಿಕಾರಿಗಳೂ ಸೇರಿದಂತೆ ಎಲ್ಲಾ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಏಜೆಂಟ್ ಗಳಾಗಿದ್ದಾರೆ, ಮಠಾಧೀಶರು ಹಾಗೂ ರೈತರ ಮೇಲೆ ಸುಳ್ಳು ಕೇಸು ದಾಖಲಿಸಿ ಪೊಲೀಸರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಕೂಡಲೇ ಸರ್ಕಾರ ಕೇಸುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಸಚಿವರು ಕಿಡಿಕಾರಿದ್ದಾರೆ.