ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು ಹಾಗೂ ಹಿರಿಯ ನಾಯಕರನ್ನು ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಯ ವೇಳೆ ಪೊಲೀಸರು ವಶಕ್ಕೆ ಪಡೆದು ಬಂಧಿಸಿರುವ ಕ್ರಮ ಖಂಡನೀಯ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಶ್ರೀನಿವಾಸ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುವ ಕೆಲಸ ನಡೆಯುತ್ತಿದೆ. ಜನರ ಸಮಸ್ಯೆಗಳನ್ನು ಸಂಸತ್ತಿನ ಒಳಗೂ ಹೊರಗೂ ಪ್ರಸ್ತಾಪಿಸುತ್ತಿರುವ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿರುವುದು ಅತ್ಯಂತ ದುರಾದೃಷ್ಟಕರ ಬೆಳವಣಿಗೆಯಾಗಿದೆ ಎಂದರಲ್ಲದೇ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಹಾಗೂ ಜನಪ್ರತಿನಿಧಿಗಳಿಗೂ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ. ಆದರೆ ಜನರ ಪರವಾಗಿ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ತನ್ನ ಅಸಹಿಷ್ಣು ಮನೋಭಾವವನ್ನು ಪ್ರದರ್ಶಿಸಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಬದಲು ವಿರೋಧ ಪಕ್ಷಗಳನ್ನು ದಮನಿಸುವ ಪ್ರವೃತ್ತಿ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ.

ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗ, ರೈತರ ಸಂಕಷ್ಟ, ಮಹಿಳೆಯರ ಮೇಲಿನ ದೌರ್ಜನ್ಯ, ಸಾಮಾಜಿಕ ನ್ಯಾಯ ಸೇರಿದಂತೆ ಹಲವು ಜನಪರ ವಿಷಯಗಳ ಕುರಿತು ಉತ್ತರ ನೀಡಲು ವಿಫಲವಾಗಿರುವ ಕೇಂದ್ರ ಸರ್ಕಾರ, ಪ್ರಶ್ನಿಸುವವರನ್ನೇ ಬಂಧಿಸುವ ಮೂಲಕ ತನ್ನ ವೈಫಲ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ. ಆದರೆ ಈ ರೀತಿಯ ದಮನಕಾರಿ ಕ್ರಮಗಳಿಂದ ಕಾಂಗ್ರೆಸ್ ಪಕ್ಷವನ್ನು ಮೌನಗೊಳಿಸಲು ಸಾಧ್ಯವಿಲ್ಲ ರಾಹುಲ್ ಗಾಂಧಿ ಹಾಗೂ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ದೇಶದ ಕೋಟ್ಯಂತರ ಜನರ ಧ್ವನಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಜನರ ಹಕ್ಕುಗಳ ರಕ್ಷಣೆಗಾಗಿ ತನ್ನ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದರು.
ಕೇಂದ್ರ ಸರ್ಕಾರ ರಾಜಕೀಯ ದ್ವೇಷವನ್ನು ಬದಿಗೊತ್ತಿ ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ಗೌರವಿಸಬೇಕು. ವಿರೋಧ ಪಕ್ಷಗಳ ವಿರುದ್ಧದ ದಮನಕಾರಿ ಕ್ರಮಗಳನ್ನು ಕೈಬಿಟ್ಟು, ದೇಶದ ಜನರು ಎತ್ತುತ್ತಿರುವ ನೈಜ ಸಮಸ್ಯೆಗಳ ಪರಿಹಾರದತ್ತ ಕೇಂದ್ರ ಸರ್ಕಾರ ಗಮನ ಹರಿಸಬೇಕು. ರಾಹುಲ್ ಗಾಂಧಿಯವರ ಬಂಧನ ಸರ್ವಾಧಿಕಾರಿ ಧೋರಣೆ ಅಲ್ಲದೆ ಮತ್ತಿನ್ನೇನು? ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡಿಸಿದ್ದು ತಪ್ಪೇ? ಅದನ್ನು ಪ್ರಶ್ನಿಸಿದ್ದಕ್ಕೆ ಬಂಧಿಸುತ್ತಾರೆಂದರೆ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಅಲ್ಲದೆ ಮತ್ತಿನ್ನೇನು? ಎಂದು ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.
